Breaking News

ಎತ್ತಿನಹೊಳೆ ಯೋಜನೆಗೆ ಭೂಸ್ವಾಧೀನಕ್ಕೆ 100 ಕೋಟಿ ಅನುದಾನ : ಸಚಿವ ರಮೇಶ್ ಜಾರಕಿಹೊಳಿ

ತುಮಕೂರು : ಜಲ ಸಂಪನ್ಮೂಲ ಇಲಾಖೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಜಲ ಯೋಜನೆಗಳ ಸ್ಥಳಗಳಿಗೆ ಭೇಟಿ ನೀಡುತ್ತಿದ್ದು, ಇಲಾಖೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುತ್ತಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಅವರು ನಿನ್ನೆ ಗುಬ್ಬಿ ತಾಲ್ಲೂಕಿನ ಚೇಳೂರು ಹೋಬಳಿಯಲ್ಲಿ ಎತ್ತಿನಹೊಳೆ ಕಾಮಗಾರಿ ಪರಿಶೀಲನೆ ನಡೆಸಿ, ಸಕಲೇಶಪುರ ಬಳಿ ಯೋಜನೆಯಲ್ಲಿದ್ದ ಲೋಪ ದೋಷಗಳನ್ನು ಸರಿಪಡಿಸಲಾಗಿದ್ದು, ಮಾರ್ಚ್ ಅಂತ್ಯದೊಳಗೆ ಎತ್ತಿನಹೊಳೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ಎತ್ತಿನ ಹೊಳೆ ಕಾಮಗಾರಿಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಭೂ ಸ್ವಾಧೀನಕ್ಕಾಗಿ 100 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸುವುದಕ್ಕಾಗಿ ಕಂದಾಯ ಮತ್ತು ಜಲಸಂಪನ್ಮೂಲ ಇಲಾಖೆಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು.

ಗುತ್ತಿಗೆದಾರರಿಗೆ ಎಚ್ಚರಿಕೆ: ಕೊರೋನಾ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಜಲಸಂಪನ್ಮೂಲ ಇಲಾಖೆ ಕಾಮಗಾರಿಯನ್ನು ವಿಳಂಬಗೊಳಿಸುವಂತಿಲ್ಲ ಎಂದು ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಲಾಗಿದ್ದು, ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು.

ಜಲಸಂಪನ್ಮೂಲ ಇಲಾಖೆ ಅನುದಾನಕ್ಕೆ ಕೊರತೆ ಇಲ್ಲ, ಮುಖ್ಯಮಂತ್ರಿ ಬಿ.ಎಸ್.ವೈ ಅವರಿಗೆ ಜಲಸಂಪನ್ಮೂಲ ಇಲಾಖೆಯ ಬಗ್ಗೆ ವಿಶೇಷ ಪ್ರೀತಿ ಇದ್ದು, ಕೊರೋನಾ ಸಂಕಷ್ಟದಲ್ಲಿಯೂ ಇಲಾಖೆಯ ಅನುದಾನವನ್ನು ಕಡಿತಗೊಳಿಸಿಲ್ಲ ಹಾಗಾಗಿ ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವುದಾಗಿ ಅವರು ತಿಳಿಸಿದರು.

Follow us on Social media

About the author