Breaking News

ಖಾಸಗಿ ಕ್ಲಿನಿಕ್ ತೆರೆಯದ ವೈದ್ಯರ ಪರವಾನಿಗೆ ರದ್ದು: ಬಿ.ಸಿ.ಪಾಟೀಲ್ ಎಚ್ಚರಿಕೆ

ಹಾವೇರಿ : ಕೊರೊನಾ‌ದಂತಹ ಮಾರಕ‌ ರೋಗ ಹರಡಿರುವ ಪ್ರಸಕ್ತ ಸಂದರ್ಭದಲ್ಲಿ ಮೆಡಿಕಲ್ ಶಾಪ್‌ಗಳಾಗಲೀ, ಖಾಸಗಿ ವೈದ್ಯರು, ಆಸ್ಪತ್ರೆಗಳನ್ನಾಗಲೀ ಯಾವುದೇ ಕಾರಣಕ್ಕೂ ಬಂದ್ ಮಾಡಬಾರದು ಎಂದು ಜಿಲ್ಲಾಧಿಕಾರಿಗಳ ಮೂಲಕ ಎಲ್ಲಾ ಖಾಸಗಿ ವೈದ್ಯರಿಗೆ ನೊಟೀಸ್ ನೀಡಲಾಗಿದೆ. ಒಂದು ವೇಳೆ ಸರ್ಕಾರದ ನೊಟೀಸ್‌ಗೂ ಬೆಲೆಕೊಡದೇ ಯಾರಾದರೂ ವೈದ್ಯರು ಆಸ್ಪತ್ರೆ ತೆರೆಯದೇ ಇದ್ದಲ್ಲಿ ಅಂತಹ ವೈದ್ಯರ ಪರವಾನಿಗೆ ರದ್ದುಪಡಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸೋಮವಾರ ಜಿಲ್ಲೆಯ ಹಿರೇಕೆರೂರು ನಗರ,‌ರಾಣೆಬೆನ್ನೂರು ,‌ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆ , ಹಾವೇರಿ ಎಪಿಎಂಸಿ ಸೇರಿದಂತೆ ಹಲವೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕೊರೊನಾ ಬಗ್ಗೆ ಜನತೆಗೆ ಜಾಗೃತಿ ಮೂಡಿಸಿದರು.
ಬಳಿಕ ಹಾವೇರಿ ನಗರಸಭಾ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಕೊರೊನಾ ಬಗ್ಗೆ ಜಾಗೃತಿ ಮೂಡಿಸುವುದು ಆರೋಗ್ಯದ ದೃಷ್ಟಿಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮಾಡುವುದು ಆರೋಗ್ಯ, ವೈದ್ಯಕೀಯ, ಗೃಹ ಈ ಇಲಾಖೆಗಳದ್ದಷ್ಟೇ ಕೆಲಸ‌ ಎಂದು ಭಾವಿಸದೇ ಜನರು ಈ ಬಗ್ಗೆ ಸ್ವಯಂಪ್ರೇರಿತರಾಗಿ ಜಾಗೃತರಾಗುವುದು ಮುಖ್ಯ ಎಂದು ಕರೆ ನೀಡಿದರು.

Source : UNI

Follow us on Social media

About the author