Breaking News

ಬಿಐಎಎಲ್ ಮುಂದೆ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ‌ ನಿರ್ಮಾಣಕ್ಕೆ 27ರಂದು ಪೂಜೆ

ಬೆಂಗಳೂರು: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮುಂದೆ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಬೃಹತ್‌ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಇದೇ 27ರಂದು ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರಾಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಜೂನ್‌ 27ರಂದು ಕೆಂಪೇಗೌಡರ 511ನೇ ಜಯಂತಿ ಇದೆ. ಹೀಗಾಗಿ ಅಂದು ಭೂಮಿ ಪೂಜೆ ಇಟ್ಟುಕೊಂಡಿದ್ದು, ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಚರ್ಚಿಸಿದ ನಂತರ ಅಂತಿಮಗೊಳಿಸಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ವಿಧಾನಸೌಧ ಮತ್ತು ವಿಕಾಸಸೌಧದ ಮಧ್ಯೆ ಇರುವ ಗಾಂಧಿ ಪ್ರತಿಮೆಯನ್ನು ನಿರ್ಮಾಣ ಮಾಡಿದ ಖ್ಯಾತ ಕಲಾವಿದ ಅನಿಲ್‌ ರಾಮಸುತಾರ್‌ ಅವರಿಗೆ ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೂ ಗುತ್ತಿಗೆ ನೀಡುತ್ತಿದ್ದು, ಸದ್ಯದಲ್ಲೇ ಅವರೊಟ್ಟಿಗೆ ಒಪ್ಪಂದಕ್ಕೆ ಸಹಿ ಹಾಕಲಾಗುತ್ತದೆ ಎಂದರು.

ಪ್ರತಿಮೆ ನಿರ್ಮಾಣಕ್ಕೆ ಅಂದಾಜು 66 ಕೋಟಿ ರೂಪಾಯಿ ಬೇಕಾಗುತ್ತದೆ. ಪ್ರತಿಮೆಯ ಮಾದರಿ ಸಿದ್ಧ ಆಗಿದ್ದು, ಅದನ್ನು ಮುಖ್ಯಮಂತ್ರಿಯವರಿಗೆ ತೋರಿಸಿದ ನಂತರ ಅಂತಿಮಗೊಳಿಸಲಾಗುವುದು. ಕಾಮಗಾರಿಯನ್ನು ಒಂದು ವರ್ಷದಲ್ಲಿ ಮುಗಿಸುವ ಉದ್ದೇಶ ಇದೆ ಎಂದು ಹೇಳಿದರು.

ಪ್ರತಿಮೆ ಸ್ಥಳಕ್ಕಾಗಿಯೇ ವಿಮಾನ ನಿಲ್ದಾಣದ ಮುಂದಿನ 23 ಎಕರೆ ಜಾಗವನ್ನು ಗುರುತಿಸಿದ್ದು, ಅಲ್ಲಿ ಕಾಮಗಾರಿ ಆರಂಭಿಸುವುದಕ್ಕೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಂಸ್ಥೆ ಒಪ್ಪಿಗೆಯೂ ನೀಡಿದೆ. ಪ್ರತಿಮೆ ಸುತ್ತ ವಿಶೇಷ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ. ಒಟ್ಟಾರೆ 80 ಕೋಟಿ ರೂಪಾಯಿ ಖರ್ಚು ಮಾಡುತ್ತಿದ್ದು, ಪ್ರಮುಖ ಆಕರ್ಷಣೆಗಳಲ್ಲಿ ಇದು ಕೂಡ ಒಂದಾಗಲಿದೆ ಎಂದರು.

Follow us on Social media

About the author