Breaking News

ಮಂಗಳೂರು: ‘ದೇರಳಕಟ್ಟೆಯಲ್ಲಿ ನೂತನ ಸರ್ಕಾರಿ ಪಿಯು ಕಾಲೇಜು ಈ ಶೈಕ್ಷಣಿಕ ವರ್ಷದಿಂದ ಆರಂಭ’-ಯು.ಟಿ. ಖಾದರ್

ಮಂಗಳೂರು : ರಾಜ್ಯದಲ್ಲಿ ಮೂರು ಸರಕಾರಿ ಪಿಯು ಕಾಲೇಜು ಆರಂಭಕ್ಕೆ ಸರ್ಕಾರ ಅನುಮತಿ ನೀಡಿದ್ದು, ಈ ಪೈಕಿ ಒಂದು ಕಾಲೇಜು ದೇರಳಕಟ್ಟೆ ನೇತಾಜಿ ಶುಭಾಶ್ ಚಂದ್ರ ಬೋಸ್ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಆರಂಭವಾಗಲಿದೆ ಎಂದು ಶಾಸಕ ಯು. ಟಿ. ಖಾದರ್‍ ತಿಳಿಸಿದ್ದಾರೆ.

ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಈ ಶೈಕ್ಷಣಿಕ ವರ್ಷದಿಂದಲೇ ತರಗತಿಗಳು ಆರಂಭವಾಗಲಿವೆ. ವಿದ್ಯಾರ್ಥಿಗಳ ಸಂಖ್ಯೆಯ ಆಧಾರದ ಮೇಲೆ ಇಲ್ಲಿ ಪಿಯು ಕಾಲೇಜು ಆರಂಭಕ್ಕೆ ಸರ್ಕಾರ ಅನುಮತಿ ನೀಡಿದೆ. ವಿಧಾನಸಭಾ ಕ್ಷೇತ್ರದ ಅಭಿವೃದ್ದಿಗೆ ಈ ಕಾಲೇಜು ಸಹಕಾರಿಯಾಗಲಿದೆ ಎಂದರು.

ಮಳೆಗಾಲದ ಸಮಸ್ಯೆಗಳ ಕುರಿತು ಚರ್ಚಿಸಲು ಜಿಲ್ಲಾಡಳಿತ ಈವರೆಗೆ ಯಾವುದೇ ಸಭೆಗಳನ್ನು ಕರೆದಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಶೀಘ್ರ ವಿಪತ್ತು ನಿರ್ವಹಣಾ ಸಮಿತಿಯ ಸಭೆ ಕರೆದು ಮಳೆಗಾಲದ ಸಮಸ್ಯೆಗಳನ್ನು ಸುಸೂತ್ರವಾಗಿ ನಿವಾರಿಸುವ ನಿಟ್ಟಿನಲ್ಲಿ ಅಧಿಕಾರಿಗಳಿ ಮಾರ್ಗದರ್ಶನ ನೀಡಬೇಕು ಎಂದು ಒತ್ತಾಯಿಸಿದರು.

ನನ್ನ ವಿಧಾನಸಭಾ ಕ್ಷೇತ್ರದಲ್ಲಿ ಮಳೆಗಾಲ ಮುನ್ನೆಚ್ಚರಿಕೆಯಾಗಿ ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿಗಳನ್ನು ರಚಿಸಲಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು, ಸಂಘಟನೆಗಳು, ಗ್ರಾಮ ಪಂಚಾಯತ್ ಪ್ರತಿನಿಧಿಗಳನ್ನು ಈ ಸಮಿತಿ ಒಳಗೊಂಡಿದೆ. ಮಳೆಗಾಲದ ಸಮಸ್ಯೆಗಳನ್ನು ಬಗೆಹರಿಸಲು ಕ್ಷೇತ್ರದ ಮೂರು ಕಡೆ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು.

ನನ್ನ ಕ್ಷೇತ್ರದ ಅನೇಕ ಕಡೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ಇದನ್ನು ಜಿಲ್ಲಾಧಿಕಾರಿಯವರ ಗಮನಕ್ಕೆ ತರಲಾಗಿದೆ. ಜಿಲ್ಲಾಧಿಕಾರಿಯವರು ಈ ಕುರಿತು ಪರಿಶೀಲಿಸಿ ವರದಿ ನೀಡುವಂತೆ ಎನ್‌ಐಟಿಕೆ ಸುರತ್ಕಲ್‌‌ನ ತಜ್ಞರ ತಂಡಕ್ಕೆ ಮನವಿ ಮಾಡಿದ್ದಾರೆ ಎಂದು ಯು.ಟಿ ಖಾದರ್ ತಿಳಿಸಿದರು.

ಸೋಮೇಶ್ವರ ಮತ್ತು ಇತರ ಸಮುದ್ರ ಬದಿಯಲ್ಲಿ ವಾಸಿಸುತ್ತಿರುವವರಿಗೆ ಕಡಲ್ಕೊರೆತದಿಂದಾಗಿ ಸಮಸ್ಯೆ ಎದುರಾಗುತ್ತಿದೆ. ಆದರೆ ಇಂತಹ ಜನರ ಬಗ್ಗೆ ರಾಜ್ಯ ಸರ್ಕಾರಕ್ಕೆ ಯಾವುದೇ ಕಾಳಜಿ ಇಲ್ಲದಾಗಿ. ಕಡಲ್ಕೊರೆತ ತಡೆಗೆ ಯಾವುದೇ ಶಾಶ್ವತ ದಾರಿಗಳನ್ನು ಸರ್ಕಾರ ಹುಡುಕುತ್ತಿಲ್ಲ. ಸಮುದ್ರ ಗೋಡೆಗಳನ್ನು ರಚಿಸಿದರೆ ಈ ಸಮಸ್ಯೆ ನಿಯಂತ್ರಣಕ್ಕೆ ಬರಬಹುದು ಎಂದರು.

ಉದಯಪುರದಲ್ಲಿ ನಡೆದ ಘಟನೆ ಹೇಯ ಕೃತ್ಯವಾಗಿದೆ. ಕಾನೂನು, ಸುವ್ಯವಸ್ಥೆ ಬಗ್ಗೆ ಹೆದರಿಕೆ ಇಲ್ಲದವರಿಂದ ಇಂತಹ ಘಟನೆಗಳು ನಡೆಯುತ್ತಿವೆ. ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಅಲ್ಲದೆ, ಇವರ ಹಿಂದಿರುವ ಜಾಲ ಮತ್ತು ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×