Breaking News

ಕೇರಳದಲ್ಲಿ ಭಾರೀ ಭೂಕುಸಿತ: ಮೃತರ ಸಂಖ್ಯೆ 15ಕ್ಕೆ ಏರಿಕೆ, ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ!

ಮುನ್ನಾರ್: ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್ ನ ರಾಜಮಲಾದ ಪೆಟ್ಟಿಮುಡಿ ಬೆಟ್ಟ ಇಂದು ನಸುಕಿನ ಜಾವ ಕುಸಿದು ಬಿದ್ದ ಪರಿಮಾಣ ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಇನ್ನು ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಅವರು 2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರುಪಾಯಿ ಪರಿಹಾರ ಘೋಷಿಸಿದ್ದಾರೆ. 

ಇನ್ನು ಅವಶೇಷಗಳಡಿಯಲ್ಲಿ 80 ಮಂದಿ ಸಿಕ್ಕಿ ಹಾಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಭೂಕುಸಿತಕ್ಕೆ ಕ್ವಾರ್ಟರ್ಸ್ ಮತ್ತು ಚರ್ಚ್ ಧರೆಗುರುಳಿದ್ದು ಹಲವರು ಸಿಕ್ಕಿಹಾಕಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಇದುವರೆಗೆ 15 ಮಂದಿಯ ಶವಗಳನ್ನು ಮಣ್ಣಿನಡಿಯಿಂದ ಹೊರತೆಗೆಯಲಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ. ಏಳು ಮಂದಿಯನ್ನು ಮಣ್ಣಿನಡಿಯಿಂದ ರಕ್ಷಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಕ್ಕಿಹಾಕಿಕೊಂಡವರಲ್ಲಿ ಬಹುತೇಕರು ಟೀ ಎಸ್ಟೇಟ್ ನಲ್ಲಿ ಕೆಲಸ ಮಾಡುವ ಕಾರ್ಮಿಕರಾಗಿದ್ದಾರೆ. 

ಇಂದು ನಸುಕಿನ ಜಾವ ಈ ದುರಂತ ಸಂಭವಿಸಿದ್ದರಿಂದ ನಿದ್ದೆಯಲ್ಲಿದ್ದ ಜನರಿಗೆ ಬೆಟ್ಟ ಕುಸಿದು ಬೀಳುವಾಗ ಎದ್ದು ಓಡಿಹೋಗಿ ತಪ್ಪಿಸಿಕೊಳ್ಳಲು ಸಮಯ ಇರಲಿಲ್ಲ. ಇದರಿಂದ ಸಾವು ನೋವು ಹೆಚ್ಚಾಗಿದೆ. ಭಾರೀ ಮಳೆಗೆ ಪ್ರವಾಹ ಉಂಟಾಗಿ ಪೆರಿಯವರ ಸೇತುವೆ ನೀರಿನಲ್ಲಿ ಕೊಚ್ಚಿ ಹೋಗಿದ್ದರಿಂದ ರಕ್ಷಣಾ ಪಡೆಗಳಿಗೆ ದುರ್ಘಟನೆ ನಡೆದ ಸ್ಥಳಕ್ಕೆ ಬೇಗನೆ ತಲುಪಲು ಸಾಧ್ಯವಾಗಿಲ್ಲ.

ದುರಂತ ಸಂಭವಿಸಿದ ಬಳಿಕ ಇಡೀ ಪ್ರದೇಶ ಹೊರ ಜಗತ್ತಿನೊಂದಿಗೆ ಸಂಪರ್ಕ ಕಳೆದುಕೊಂಡಿದ್ದು ಸಂಪರ್ಕ ಜಾಲಗಳು ಕಡಿತವಾಗಿವೆ. ಸದ್ಯ ಸ್ಥಳದಲ್ಲಿ ಅಗ್ನಿಶಾಮಕ ಮತ್ತು ರಕ್ಷಣಾ ಪಡೆ ಸಿಬ್ಬಂದಿ, ಎನ್ ಡಿಆರ್ ಎಫ್, ಕಂದಾಯ ಇಲಾಖೆ ಅಧಿಕಾರಿಗಳು, ಎಸ್ಟೇಟ್ ಕಾರ್ಮಿಕರು ಮತ್ತು ಪೊಲೀಸರು ಅವಶೇಷಗಳಡಿ ಸಿಲುಕಿರುವವರನ್ನು ಹೊರತೆಗೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ. 
ಜಿಲ್ಲಾಧಿಕಾರಿ ಹೆಚ್ ದಿನೇಶನ್ ಮಾತನಾಡಿ, ರಕ್ಷಣಾ ಸಿಬ್ಬಂದಿಯನ್ನು ಪೆಟ್ಟುಮುಡಿಗೆ ಕಳುಹಿಸಲಾಗಿದ್ದು ಅಲ್ಲಿ ಜನರನ್ನು ಹುಡುಕುವ ಮತ್ತು ರಕ್ಷಿಸುವ ಕಾರ್ಯ ನಡೆಯುತ್ತಿದೆ ಎಂದಿದ್ದಾರೆ. 

ಸದ್ಯ ಹತ್ತು ಮಂದಿಯನ್ನು ಅವಶೇಷಗಳಡಿಯಿಂದ ರಕ್ಷಿಸಿದ್ದು ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ವಾಯುಪಡೆಯ ಸಹಾಯ ಕೇಳಿದ ಮುಖ್ಯಮಂತ್ರಿ ಪಿನರಾಯಿ ವಿಜಯನ್: ಮುನ್ನಾರ್ ದುರಂತದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್, ಇಡುಕ್ಕಿಯ ಮುನ್ನಾರ್ ಹತ್ತಿರ ರಾಜಮಾಲಾದಲ್ಲಿ ಉಂಟಾಗಿರುವ ಭೂಕುಸಿತದಲ್ಲಿ ಅವಶೇಷಗಳಡಿಯಲ್ಲಿ ಸಿಕ್ಕಿಹಾಕಿಕೊಂಡವರ ರಕ್ಷಣಾ ಕಾರ್ಯ ಸಾಗುತ್ತಿದೆ. ಪರಿಹಾರ ಕಾರ್ಯಕ್ಕೆ ಹೆಲಿಕಾಪ್ಟರ್ ಸೇವೆ ಪಡೆಯಲು ಭಾರತೀಯ ವಾಯುಪಡೆಯನ್ನು ಸಂಪರ್ಕಿಸಲಾಗಿದೆ. ಅದು ಸದ್ಯದಲ್ಲಿಯೇ ಬರುವ ನಿರೀಕ್ಷೆಯಿದೆ ಎಂದಿದ್ದಾರೆ. 

Follow us on Social media

About the author